ಕಾರವಾರ : ತನ್ನದೇ ಆದ ಕಲೆ, ಸಂಸ್ಕೃತಿಯ ಮೂಲಕ ನಾಡಿನ ಸಾಂಸ್ಕೃತಿಕ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಜಿಲ್ಲೆ ಉತ್ತರ ಕನ್ನಡ ಜಿಲ್ಲೆ. ಜಿಲ್ಲೆಯ ಕಲೆ ಮತ್ತು ಸಂಸ್ಕೃತಿಯನ್ನು ಸದೃಢಗೊಳಿಸಲು ಜಿಲ್ಲಾಡಳಿತದ ನೇತೃತ್ವದಲ್ಲಿ ಆಯೋಜನೆಗೊಂಡ ಕರಾವಳಿ ಉತ್ಸವ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ ಎನ್ ವಾಸರೆ ಅವರು ಹೇಳಿದರು. ಅವರು ಶುಕ್ರವಾರ ರಾತ್ರಿ 8:30 ಗಂಟೆ ಸುಮಾರಿಗೆ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ಆಯೋಜಿಸಲಾದ ಕರಾವಳಿ ಉತ್ಸವ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿದ್ದ ಕವಿ ಕಾವ್ಯ ಕುಂಚ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.