ಹೊನ್ನಾವರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ೨೦೨೬ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ ಪಟ್ಟಣದ ಸೊಶಿಯಲ್ ಕ್ಲಬ್ ಆವರಣದಲ್ಲಿ ನಡೆಯಿತು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ನರಸಿಂಹ ಅಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರು ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಸಮಾಜವು ಪತ್ರಕರ್ತರನ್ನು ಬೆಂಬಲಿಸಿ ಉತ್ತಮ ಕಾರ್ಯಗಳಿಗೆ ಕೈಜೋಡಿಸಬೇಕು ಎಂದರು. ಸಂಘದ ರಾಜ್ಯ ಸಮಿತಿ ಸದಸ್ಯ ವಿಠ್ಠಲದಾಸ ಕಾಮತ್ ಮಾತನಾಡಿ ಪತ್ರಕರ್ತರ ಕೆಲಸ ಜವಾಬ್ದಾರಿಯುತವಾದುದು. ಪತ್ರಕರ್ತರು ತಮ್ಮ ಆರೋಗ್ಯದ ಕಡೆ ವಿಶೇಷ ಕಾಳಜಿ ವಹಿಸಬೇಕು. ಆ ನಿಟ್ಟಿನಲ್ಲಿ ಪತ್ರಕರ್ತರಿಗೆ ಸಂಘಟನೆಯು ಸಹಕಾರಿಯಾಗಿದೆ ಎಂದರು.