ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರಕ್ಕೊದೊಂದು ವಾರ್ಡ್ ಗೆ ಭೇಟಿ ನೀಡಿ ನಿವಾಸಿಗಳ ಅಹವಾಲುಗಳ ಆಲಿಸಲಾಗುವುದೆಂದು ಆಯುಕ್ತರಾದ ಕೆ.ಎನ್ ರಮೇಶ್ ರವರು ತಿಳಿಸಿದರು. ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಜೆಪಿ ನಗರ ಸೇರಿದಂತೆ ಹಲವು ಅಪಾರ್ಟ್ಮೆಂಟ್ ಅಸೋಸಿಯೇಷನ್, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸಭೆ ನಡೆಸಿ, ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿದ ಬಳಿಕ ಮಾತನಾಡಿದ ಅವರು, ದಕ್ಷಿಣ ನಗರ ಪಾಲಿಕೆಯಲ್ಲಿ 72 ವಾರ್ಡ್ ಗಳು ಬರಲಿದ್ದು, ವಾರಕ್ಕೆ ಒಂದು ವಾರ್ಡ್ ಗೆ ತೆರಳಿ ನಾಗರಿಕರ ಸಮಸ್ಯೆಗಳನ್ನು ಖುದ್ದು ಆಲಿಸಿ, ಸ್ಥಳಿಯವಾಗಿರುವ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಲಾಗುವುದೆಂದು ತಿಳಿಸಿದರು.