ಹಳಿಯಾಳ : ಪಟ್ಟಣದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮಿತಿಮೀರಿ ಬರುತ್ತಿರುವ ವಾಹನಗಳಿಂದಾಗುತ್ತಿರುವ ಟ್ರಾಫಿಕ್ ಸಮಸ್ಯೆಯಿಂದ ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಈ ನಿಟ್ಟಿನಲ್ಲಿ ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣವು ತಹಶೀಲ್ದಾರ್ ಕಾರ್ಯಾಲಯದಲ್ಲಿ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಸಂಜೆ 4:00 ಗಂಟೆ ಸುಮಾರಿಗೆ ಮನವಿಯನ್ನು ನೀಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ, ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಜಿ.ಡಿ.ಗಂಗಾದರ, ಪ್ರಮುಖರಾದ ಪೂಜಾ ದೂಳಿ, ಮಹೇಶ್ ಆನೆಗುಂದಿ, ವಿಜಯ ಪಡ್ನಿಸ, ವಿನೋದ ಗಿಂಡೆ, ಸುರೇಶ್ ಕೊಕಿತಕರ ಮೊದಲಾದವರಿದ್ದರು.