ಹಳಿಯಾಳ : ಸಿಐಡಿ ಪೊಲೀಸ್ ಅರಣ್ಯ ಘಟಕದ ವತಿಯಿಂದ ಪರಿಸರ ಸಂರಕ್ಷಣೆ ಮತ್ತು ವನ್ಯಜೀವಿ ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ತಾಲೂಕಿನ ಭಾಗವತಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಅರಣ್ಯ ಮತ್ತು ವನ್ಯಜೀವಿ ರಕ್ಷಣೆ ಹಾಗೂ ವನ್ಯಜೀವಿ ಕಾಯ್ದೆಯ ಕುರಿತಂತೆ ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಹಮ್ಮಿಕೊಳ್ಳಲಾಯಿತು. ಸಿಐಡಿ ಪೊಲೀಸ್ ಅರಣ್ಯ ಘಟಕದ ಪಿಎಸ್ಐ ಯಲ್ಲಪ್ಪ.ಎಸ್ ಮಾತನಾಡಿ ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯವಾಗಿದೆ. ಅರಣ್ಯ ಮತ್ತು ವನ್ಯಜೀವಿಗಳ ಮೇಲೆ ಬೇಟೆ, ಅರಣ್ಯ ಅತಿಕ್ರಮಣ, ಅರಣ್ಯಕ್ಕೆ ಬೆಂಕಿ ಕೊಡುವುದು, ಅರಣ್ಯ ಪ್ರದೇಶದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಚೆಲ್ಲುವುದು ಹೀಗೆ ಮೊದಲಾದ ರೀತಿಗಳಲ್ಲಿ ಮಾನವ ಹಸ್ತಕ್ಷೇಪ ಮಾಡಬಾರದೆಂದರು.